Latest News

ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ ಶಿವರಾಜ್

ಮೈಸೂರು,ಫೆ.02:-  ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಬಾಲ್ಯ ವಿವಾಹವನ್ನು ತಡೆಗಟ್ಟಲು ಸಾರ್ವಜನಿಕರು ಅಧಿಕಾರಿಗಳೊಂದಿಗೆ ಕೈಜೋಡಿಸಬೇಕು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತಂದು ತಡೆಗಟ್ಟಬೇಕು ಎಂದರು.

ಫೆಬ್ರವರಿ 11 ರಂದು ಕಾರ್ಯಾಗಾರ

2025 26 ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಲಿತ ಮಕ್ಕಳ ಸಮಸ್ಯೆಗಳನ್ನು ಕುರಿತು ಒಂದು ದಿನದ ತರಬೇತಿ ಕಾರ್ಯಗಾರವನ್ನು  ಫೆಬ್ರವರಿ 11 ರಂದು  ಬಾಲ್ಯ ವಿವಾಹ ನಿಷೇಧಾಧಿಕಾರಿಗಳಿಗೆ ಆಯೋಜಿಸಲಾಗುವುದು ಎಂದರು.

ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿರುತ್ತದೆ. ಎಲ್ಲಾ ಇಲಾಖೆಗಳಿಂದ ಸರ್ಕಾರದಿಂದ ನೇಮಿಸಲ್ಪಟ್ಟಿರುವ ಎಲ್ಲಾ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಗಾರಕ್ಕೆ ಹಾಜರಾಗಿ ತರಬೇತಿಯನ್ನು ಪಡೆದು ಮೈಸೂರು ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶ್ರೀಮತಿ ಎಸ್ ಮಂಜು ರವರು ಮಾತನಾಡಿ 18 ವರ್ಷದ ಒಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಿದ್ದು, ಪ್ರತಿಯೊಬ್ಬ ಅಧಿಕಾರಿಯು ಮಕ್ಕಳ ಹಕ್ಕುಗಳನ್ನ ರಕ್ಷಣೆ ಮಾಡುವುದರ ಮೂಲಕ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಬ್ಬರು ಸಹಕರಿಸಬೇಕೆಂದರು.

ಸಭೆಯಲ್ಲಿ   ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ‌ ಯೋಗೇಶ್ ಎನ್ ಟಿ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜನಾಧಿಕಾರಿ ವಿಜಯ್ ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ,   ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರವಿಚಂದ್ರ ಸದಸ್ಯ ಮಹದೇವ್ ಕೋಟೆ ಸೇರಿದಂತೆ  ಇತರರು ಸಭೆಯಲ್ಲಿ ಭಾಗವಹಿಸಿದರು.

Contact us for classifieds and ads : +91 9742974234